ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಇರುವಂತಹ ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಲಾಭವನ್ನು ಸಕಾಲಕ್ಕೆ ದೊರಕಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲ ಬಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಇವರ ಸಯುಕ್ತಶ್ರಯದಲ್ಲಿ ಹಮ್ಮಿಕೊಂಡಿದ್ದ ಲಿಂಗ, ಲಿಂಗತ್ವ, ಲೈಂಗಿಕತೆ ಸಂವೇದನಾಶೀಲ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಗಳನ್ನು ಮೀಸಲಿಟ್ಟಿದ್ದು ಇವುಗಳ ಲಾಭ ಅವರಿಗೆ ಸಕಾಲಕ್ಕೆ ದೊರಕಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರನ್ನು ಸಬಲರನ್ನಾಗಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸುವಂತೆ ಅವರು ಸೂಚನೆ ನೀಡಿದರು.
ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿವಿಧ ನಿಗಮದ ಅಧಿಕಾರಿಗಳು, ಕಂದಾಯ, ಶಿಕ್ಷಣ ಇಲಾಖೆ, ವಿವಿಧ ಬ್ಯಾಂಕ್ ಅಧಿಕಾರಿಗಳು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಸೌಲತ್ತುಗಳನ್ನು ಆದ್ಯತೆ ಮೇಲೆ ದೊರಕಿಸಬೇಕು ಅವರ ಶ್ರಮಕ್ಕೆ ಸಕಾಲಕ್ಕೆ ಸ್ಪಂದಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಆದ್ಯತೆ ಮೇಲೆ ಅವರಿಗೆ ಸಿಗುವ ಸೌಲಭ್ಯಗಳನ್ನು ದೊರಕಿಸಬೇಕು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ತರುವ ದಿಶೆಯಲ್ಲಿ ಅಧಿಕಾರಿಗಳು ಶ್ರಮಿಸುವಂತೆ ಸಲಹೆ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡಿ, ಡಿಹೆಚ್ಓ ಡಾ.ಪ್ರಭುಲಿಂಗ ಮಾನಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೇಮಮೂರ್ತಿ ಕೆ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್, ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ದೊಡ್ಮನಿ, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಲಕ್ಷ್ಮಣ ಮಾಳವೀಕ, ಚೇಂಜ್ ಫೌಂಡೆಶನ್ ಅಧ್ಯಕ್ಷೆ ಮಾಯಾ ಎಸ್ ಆರ್ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು , ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು





