ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ಸಿಂಗ್ ತಿಳಿಸಿದರು.
ಕೆಕೆಆರ್ ಡಿಬಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯನ್ನು ಕೇವಲ ಐದಾರು ತಿಂಗಳಲ್ಲಿ ಅಮೂಲಾಗ್ರವಾಗಿ ಬದಲಾಯಿಸುವುದು ಅಸಾಧ್ಯದ ಮಾತಾಗುತ್ತದೆ. ಈ ನಿಟ್ಟಿನಲ್ಲಿ ದೀರ್ಘಕಾಲಿಕ ಕಾರ್ಯಯೋಜನೆ ರೂಪಿಸುವ ಅಗತ್ಯವಿದೆ. ಹಾಗಾಗಿ, ಶಿಕ್ಷಣ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ತಜ್ಞರ ವರದಿಗೆ ಅನುಗುಣವಾಗಿ ಎಲ್ಲ ಅಂಶಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಏಳು ಜಿಲ್ಲೆಗಳಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಪರಾಮರ್ಶೆ ನಡೆಸಲು ಮುಂದಿನ ಎರಡು ತಿಂಗಳೊಳಗೆ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು





