Home Uncategorized ಬೀದಿ ಬದಿ ವ್ಯಾಪಾರಸ್ಥರು ಪಿ.ಎಂ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಿರಿ: ಪೌರಾಯುಕ್ತ ಲಕ್ಷ್ಮೀಕಾಂತ

ಬೀದಿ ಬದಿ ವ್ಯಾಪಾರಸ್ಥರು ಪಿ.ಎಂ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಿರಿ: ಪೌರಾಯುಕ್ತ ಲಕ್ಷ್ಮೀಕಾಂತ

0

ಯಾದಗಿರಿ ನಗರದ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಪಿ.ಎಂ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆದುಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಲಕ್ಷ್ಮೀಕಾಂತ ಅವರು ಕರೆ ನೀಡಿದರು.

ಜಿಲ್ಲಾಡಳಿತ, ನಗರಸಭೆ, ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆದ ಡೇ ನಲ್ಮಾ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರಿಗೆ ಅರಿವು, ಜಾಗೃತಿಯ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಿ .ಎಂ. ಸ್ವ-ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಸಾಲ ಸೌಲಭ್ಯವನ್ನು ಹಾಲು ಮತ್ತು ದಿನಪತ್ರಿಕೆ ವಿತರಕರು, ಡೋಬಿ ಮತ್ತು ಇಸ್ತ್ರಿ ಸೇವೆ, ಹಳೆಯ ಪಾತ್ರೆಗಳನ್ನು ವ್ಯಾಪಾರ ಮಾಡುವವರು, ಬಡಗಿ, ಚಮ್ಮಾರರು, ಬಿದಿರಿನ ಬುಟ್ಟಿ, ಬೊಂಬು ಬಾಸ್ಕೆಟ್, ಏಣಿ ವ್ಯಾಪಾರಸ್ಥರು, ಹೂವಿನ ಕುಂಡಗಳನ್ನು ಮಾಡುವವರು, ನೇಯ್ಗೆಗಾರರು, ಎಳನೀರು ಮಾರಾಟಗಾರರು, ಆಹಾರ ತಯಾರಿಸಿ ಮಾರಾಟ ಮಾಡುವವರು (ಕ್ಯಾಟರಿಂಗ್ ಸರ್ವಿಸ್) ಇತ್ಯಾದಿ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡವರಿಗೆ ಕೂಡ ವಿಸ್ತರಿಸಲಾಗಿದೆ ಎಂದರು.

ನಗರಸಭೆಯ ಕಾರ್ಯಪಾಲಕ ಅಭಿಯಂತರ ರಜನಿಕಾಂತ ಮಾತನಾಡಿ; ವ್ಯಾಪಾರಸ್ಥರು ನಿಗದಿತ ಸ್ಥಳದಲ್ಲಿಯೇ ವ್ಯಾಪಾರ ಮಾಡಿ ನಗರಸಭೆಗೆ ಸಹಕಾರ ನೀಡಬೇಕು. ಬ್ಯಾಂಕ್ ಗಳೊಂದಿಗೆ ಸಹಕರಿಸಿ ಸಾಲವನ್ನು ಮರುಪಾವತಿ ಮಾಡಿ ಹೆಚ್ಚಿನ ಮಟ್ಟದಲ್ಲಿ ಆರ್ಥಿಕ ಅಭಿವೃದ್ದಿ ಪಡಿಸಿಕೊಳ್ಳಲು ಅವರು ತಿಳಿಸಿದರು.

ಕೌಶಲ್ಯಾಭಿವೃದ್ದಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ ಅವರು ಮಾತನಾಡಿ; ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಾರೆ ಅವರಿಗೆ ನೆರವು ನೀಡಲು ಸರ್ಕಾರಗಳು ಅನೇಕ ರೀತಿಯ ಸಾಲ ಸೌಲಭ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಸುರಕ್ಷಾ ಬಿಮಾ ಇನ್ನಿತರ ಯೋಜನೆಗಳಿವೆ ಎಂದರು. ನಗರದಲ್ಲಿರುವ ಮಹಿಳೆಯರು ಸ್ವಸಹಾಯ ಸಂಘ ರಚನೆ ಮಾಡಿಕೊಳ್ಳಲು ಅಭಿಯಾನ ಜರುಗಿಸುತ್ತಿದ್ದು, ಎಲ್ಲಾ ಮಹಿಳೆಯರು ಇದರ ಪ್ರಯೋಜನ ಪಡೆದು ಮಹಿಳಾ ಸಂಘದ ಸದಸ್ಯರಾಗಲು ತಿಳಿಸಿದರು.

ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ವೈದ್ಯ ಅವರು ಮಾತನಾಡಿ; ಪಾರಂಪರಿಕವಾಗಿ ವ್ಯಾಪಾರವನ್ನೇ ನಂಬಿಕೊಂಡಿರುವ ಕುಟುಂಬಗಳ ಆರ್ಥಿಕ ಅಭಿವೃದ್ದಿಗೆ ಈ ಯೋಜನೆ ಪೂರಕವಾಗಿದೆ. ಇದರ ಸದುಪಯೋಗ ಪಡೆದುಕೊಂಡು ನೆಮ್ಮದಿಯ ಬದುಕನ್ನು ರೂಪಿಸಿಕೊಳ್ಳಲು ಮುಂದಾಗಬೇಕು.
ನಗರದಲ್ಲಿ ಸ್ವಚ್ಛ ಹಾಗೂ ಉತ್ತಮವಾದ ವಸ್ತುಗಳನ್ನು ಮಾರಾಟ ಮಾಡಬೇಕು. ಸಾರ್ವಜನಿಕರಿಗೆ, ಸಾರಿಗೆ ಸಂಚಾರಕ್ಕೆ ಯಾವುದೇ ಅಡೆತಡೆ ಆಗದಂತೆ ತಮ್ಮ ವ್ಯಾಪಾರ ಮಾಡಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಜಿಲ್ಲಾ ಸಿವಿಲ್ ನ್ಯಾಯಧೀಶ ಎಂ. ಹೆಚ್. ಶಿರವಾಳ, ಉಪ ತಹಶೀಲ್ದಾರ ಎಂ. ಡಿ ಶಕೀಲ್, ಎಸ್.ಬಿ.ಐ ಬ್ಯಾಂಕ್ ನ ಎಫ್ .ಎಲ್. ಸಿ .ಸಂಗಪ್ಪ ವಾಲಿ, ನಗರಸಭೆಯ ಸಿ ಆರ್ ಪಿ ಗಳಾದ ಸಾಬಮ್ಮ, ಅವ್ವಮ್ಮ, ಪ್ರೇಮಾ ಸೇರಿದಂತೆ ಬೀದಿ ಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

error: Content is protected !!